ಶಬರಿಯಂತೆ ಕಾದರೂ ಪ್ರಯೋಜನವಿಲ್ಲ: ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಕುರಿತು ಅಂಕಿ ಅಂಶಗಳನ್ನ ಬಿಚ್ಚಿಟ್ಟ ಸಿದ್ದರಾಮಯ್ಯ

ಶಬರಿಯಂತೆ ಕಾದರೂ ಪ್ರಯೋಜನವಿಲ್ಲ: ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಕುರಿತು ಅಂಕಿ ಅಂಶಗಳನ್ನ ಬಿಚ್ಚಿಟ್ಟ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 05: ಸೆಪ್ಟೆಂಬರ್ 23 ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ ಕರೆಯದೆ ಬರ ಪರಿಹಾರ ಬರುವುದೇ ಇಲ್ಲ. ಇವರು ಸಭೆ ಕರೆದೇ ಇಲ್ಲ ಎಂದು ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಸುದ್ದಿಗೋಷ್ಟಿಯನ್ನ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅಂಕಿ ಅಂಶಗಳು, ದಾಖಲೆಗಳನ್ನೇ ಮುಂದಿಟ್ಟು ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ದಗರೋಹ, ಅನ್ಯಾಯ, ವಂಚನೆ, ಮಲತಾಯಿ ಧೋರಣೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇವತ್ತಿನವರೆಗೂ ಪ್ರಾಥಮಿಕ ಸಭೆಯನ್ನೇ ಕರೆದಿಲ್ಲ. ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆ. 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಇದಕ್ಕೆ 17901 ಕೋಟಿ ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. NDRF ನಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಪ್ರವಾಹ ಬಂದಾಗ CM ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ NDRF ಗಾಗಿ ಗೋಗರೆದರೂ ಪರಿಹಾರ ಕೊಡಲಿಲ್ಲ ಎಂದರು. ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ರಾಜ್ಯಕ್ಕೆ ನಿರಂತರ ಅನ್ಯಾಯ ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ ಹಣವೂ ಇಲ್ಲ. 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ ಎಂದರು. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ ಎಂದರು. ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನಷ್ಟ ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ , ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹ ವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7 ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15 ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಮ್ಮ ರಾಜ್ಯಕ್ಕೆ ನಗದು ಹಂಚಿಕೆಯಲ್ಲಿ 62098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದರು. ರಾಜ್ಯಕ್ಕೆ 73,593 ಕೋಟಿ ರೂ.ಗಳು ತೆರಿಗೆ ಪಾಲು ಕಡಿಮೆ ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಶೇ 4.71 ರಿಂದ ಶೇ 3.74 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು 5495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲು ಶಿಫಾರಸ್ಸು ಮಾಡಲಾಗಿತ್ತು. ಮಧ್ಯಂತರ ಬಜೆಟ್ ನಲ್ಲಿ ಈ ಬಗ್ಗೆ ಶಿಫಾರಸ್ಸು ಮಾಡಿದರು. ಈ ಹಣವೂ ರಾಜ್ಯಕ್ಕೆ ಬರಲಿಲ್ಲ. ಈ ಮೊತ್ತವನ್ನು ಕೇಂದ್ರ ಸರ್ಕಾರವನ್ನು ಕೇಳಿ ಪಡೆಯಲು ವಿಧಾನಸಭೆಯಲ್ಲಿ ವಿಷಯ ಮಂಡಿಸಿದ್ದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕರಿಸಿದರು. ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಫೆರಲ್ ರಿಂಗ್ ರೋಡಿಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಲು 3000 ಸೇರಿ 6000 ಕೋಟಿ ರೂ. ಗಳನ್ನು ಹೆಚ್ವರಿಯಾಗಿ ಕೊಡಲು ಶಿಫಾರಸು ಮಾಡಲಾಯಿತು. ಈ ಹಣವೂ ಬರಲಿಲ್ಲ. ಮೋದಿ ಅವರು ಪ್ರಧಾನಿ ಆದ ಬಳಿಕ 2020-21 ರಿಂದ 2025-26 ರವೆಗಿನ ಅವಧಿಗೆ ರಚನೆಯಾದ 15 ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ. ಅಂತೆಯೇ 2020-21 ಹಾಗೂ 2021-22 ನೇ ಸಾಲಿಗೆ ವಿಶೇಷ ಅನುದಾನ ಕೊಡದೆ ರಾಜ್ಯಕ್ಕೆ 11,495 ಕೋಟಿ ರೂ.ಗಳು ನಷ್ಟವಾಗಿದೆ. ಒಟ್ಟಾರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲಿನಲ್ಲಿ 73,593 ಕೋಟಿ ರೂ.ಗಳು ಕಡಿಮೆಯಾಯಿತು ಎಂದರು. GST ನಲ್ಲಿ ರಾಜ್ಯಕ್ಕೆ ಅನ್ಯಾಯ GST ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ 15% ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು.‌ ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ. ಈಗ ಪರಿಹಾರ ಕೊಡ್ತಾ ಇಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಇದರಿಂದಾಗಿ ಈಗ ನಮ್ಮ ತೆರಿಗೆ ಬೆಳವಣಿಗೆ 15% ಗೆ ಮತ್ತೆ ತಲುಪಲು ಆಗಲೇ ಇಲ್ಲ. ಹೀಗಾಗಿ ಪರಿಹಾರ ಮುಂದುವರೆಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಈಗಲೂ ನಮಗೆ , ನಮ್ಮ ರಾಜ್ಯಕ್ಕೆ GST ನಲ್ಲಿ ಅನ್ಯಾಯ ಆಗುತ್ತಲೇ ಇದೆ ಎಂದರು. ರಾಜ್ಯದಿಂದ ಪ್ರತಿ ವರ್ಷ ಕೇಂದ್ರಕ್ಕೆ 4, 30,000 ಕೋಟಿ ತೆರಿಗೆ ವಸೂಲಿ ಆಗಿ ಹೋಗುತ್ತಿದೆ. ತೆರಿಗೆ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ಬಿಟ್ಟರೆ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮಗೆ ಈ ವರ್ಷ ತೆರಿಗೆ ಪಾಲಿನಲ್ಲಿ 37, 252 ಕೋಟಿ ಬರುವುದು. ಕೇಂದ್ರ ಪುರಸ್ಕ್ರುತ ಯೋಜನೆಯಲ್ಲಿ 13,005 ಕೋಟಿ ಎರಡೂ ಸೇರಿ ಕೇವಲ 50,257 ಕೋಟಿ ರಾಜ್ಯಕ್ಕೆ ಬಂದಿದೆ. ರಾಜ್ಯಕ್ಕೆ ಇದು ಭೀಕರ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದರು.

Previous Post
ರಾಜ್ಯ ಸರ್ಕಾರದ ತಪ್ಪು ಮುಚ್ಚಿಕೊಳ್ಳಲು ಕೇಂದ್ರದ ವಿರುದ್ದ ಪ್ರತಿಭಟನೆ ರಾಜಕೀಯ ಸ್ಟಂಟ್: ಬೊಮ್ಮಾಯಿ ಆರೋಪ
Next Post
ಮನಮೋಹನ್ ಸಿಂಗ್ ಆಡಳಿತ ವಿವರಿಸಿ ಬಿಜೆಪಿಗೆ ಚಾಲೆಂಜ್ ಮಾಡಿದ ಜಿ.ಪರಮೇಶ್ವರ್

Recent News