ಇದು ಮೋದಿ ಭಾರತ, ಬಾಂಗ್ಲಾದೇಶದಂತಹ ಪರಿಸ್ಥಿತಿ ಉಂಟಾಗಲ್ಲ; ಕಾಂಗ್ರೆಸ್ಗೆ ಶೇಖಾವತ್ ತಿರುಗೇಟು
ನವದೆಹಲಿ: ಇದು ಮೋದಿಯವರ ಭಾರತ, ಬಾಂಗ್ಲಾದೇಶದಂತಹ ಪರಿಸ್ಥಿತಿ ಬರೋದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಧಾನಿಗಳ ಪರ ಬ್ಯಾಟ್ ಬೀಸಿದ್ದಾರೆ. ಜೋಧ್ಪುರ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ನಡೆದಂತೆ ಭಾರತದಲ್ಲೂ ಮುಂದೊಂದು ದಿನ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಜನರು ನುಗ್ಗುತ್ತಾರೆ ಎಂಬ ಮಧ್ಯಪ್ರದೇಶ ಕಾಂಗ್ರೆಸ್ನ ಹಿರಿಯ ನಾಯಕ ಸಜ್ಜನ್ ಸಿಂಗ್ ವರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ ಉದ್ಭವಿಸುತ್ತದೆ ಎಂದು ಕೆಲವರು ಕಾಮೆಂಟ್ ಮಾಡಿರುವುದು ದುರದೃಷ್ಟಕರ. ಅಂತಹ ಪರಿಸ್ಥಿತಿ ಇಲ್ಲಿ ಬರಲು ಸಾಧ್ಯವಿಲ್ಲ, ಏಕೆಂದರೆ ಇದು ಮೋದಿ ಅವರ ಭಾರತ. ಬಾಂಗ್ಲಾದೇಶದಲ್ಲಿ ನಡೆದಿರುವುದು ಅನಿರೀಕ್ಷಿತವಲ್ಲ. ಅಲ್ಲಿನ ಪರಿಸ್ಥಿಯ ಬಗ್ಗೆ ಭಾರತ ಕಣ್ಣಿಟ್ಟಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸ್ವದೇಶ್ ದರ್ಶನ್ ಯೋಜನೆಯಡಿ ರಾಜಸ್ಥಾನಕ್ಕೆ 4 ಸರ್ಕ್ಯೂಟ್ ನೀಡುತ್ತಿರುವ ಕುರಿತು ಮಾತನಾಡಿದ ಅವರು, ಪ್ರವಾಸೋದ್ಯಮವು ಆಯಾ ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಗಳ ಸಹಯೋಗದೊಂದಿಗೆ ಇಡೀ ದೇಶದಲ್ಲಿ ಪ್ರವಾಸೋದ್ಯಮ ಹೆಚ್ಚಿಸಲು ಕೆಲಸ ಮಾಡುತ್ತೇವೆ. ರಾಜ್ಯ ಸರ್ಕಾರದಿಂದ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಗಳು ಬಂದರೆ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಕೊಂಡೊಯ್ಯುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಮುಂದುವರಿದು ಮಾತನಾಡಿ, ವರ್ಷಾಂತ್ಯದ ವೇಳೆಗೆ ಜೋಧ್ಪುರ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡ ಉದ್ಘಾಟಿಸಲಾಗುವುದು. ಅದರ ಶೇ.45ಕ್ಕೂ ಹೆಚ್ಚು ಕಾಮಗಾರಿ ಪೂರ್ಣಗೊಂಡಿದೆ ಎಂದು ಕೇಂದ್ರ ಸಚಿವರು ಹೇಳಿದರು.