ಕೇಜ್ರಿವಾಲ್ಗೆ ಆಂಬುಲೆನ್ಸ್ ಕಳುಹಿಸಿ ಕಿಚಾಯಿಸಿದ ಬಿಜೆಪಿ ನಾಯಕ
ನವದೆಹಲಿ, ಜೂ. 1: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಸರಿಯಾಗಿಲ್ಲ ಎನ್ನಲಾಗಿದೆ. ತಾನು ಕೆಲವು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದೇನೆ ಎಂದು ಹೇಳಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಹಿರಿಯ ಬಿಜೆಪಿ ನಾಯಕ ವಿಜಯ್ ಗೋಯೆಲ್ ಶನಿವಾರ ಆಂಬುಲೆನ್ಸ್ ಕಳುಹಿಸಿ ಕಿಚಾಯಿಸಿದ್ದಾರೆ.
ಕೇಜ್ರಿವಾಲ್ ಅವರು ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕು ಎಂಬ ಕಾರಣಕ್ಕಾಗಿ ತಮ್ಮ ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸಬೇಕೆಂದು ಕೋರಿ ಮೇ 26ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನಾನು ಜೈಲಿನಲ್ಲಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದೇನೆ ಮತ್ತು ನನ್ನ ಕೀಟೋನ್ ಮಟ್ಟಗಳು ತುಂಬಾ ಹೆಚ್ಚಾಗಿದೆ. ಜೈಲಿನಲ್ಲಿ ನನಗೆ ನನ್ನ ಮಾತ್ರೆಗಳನ್ನು ತೆಗೆದುಕೊಳ್ಳಲು ಸರಿಯಾಗಿ ಅವಕಾಶ ನೀಡುತ್ತಿರಲಿಲ್ಲ ಎಂದು ಅವರು ತಮ್ಮ ಮನವಿಯಲ್ಲಿ ಹೇಳಿಕೊಂಡಿದ್ದರು. ಇಲ್ಲಿನ ಸಿವಿಲ್ ಲೈನ್ಸ್ನಲ್ಲಿರುವ ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಹೋಗುವ ಮಾರ್ಗಮಧ್ಯೆ ಪೊಲೀಸರು ಗೋಯೆಲ್ ಕಳುಹಿಸಿದ್ದ ಆಂಬುಲೆನ್ಸ್ ಅನ್ನು ತಡೆದಿದ್ದಾರೆ.
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ಗೆ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10ರಂದು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು. 7 ಹಂತಗಳ ಲೋಕಸಭೆ ಚುನಾವಣೆ ಮುಗಿದ ಒಂದು ದಿನದ ನಂತರ ಜೂನ್ 2ರಂದು ಶರಣಾಗುವಂತೆ ಆಪ್ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ನಿರ್ದೇಶನ ನೀಡಲಾಗಿತ್ತು.
ಜನರ ಸಹಾನುಭೂತಿ ಗಳಿಸಲು ಕೇಜ್ರಿವಾಲ್ ಅವರು ಆರೋಗ್ಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಾಟಕ ರಚಿಸುತ್ತಿದ್ದಾರೆ ಎಂದು ಗೋಯಲ್ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು ‘ನಾಟಕ’ವನ್ನು ನಿಲ್ಲಿಸಿ ಅವರ ಆರೋಗ್ಯದ ಬಗ್ಗೆ ಕಾಳಜಿ ಇದ್ದರೆ ಆಂಬುಲೆನ್ಸ್ನಲ್ಲಿ ಪರೀಕ್ಷೆಗೆ ಹೋಗಬೇಕು ಎಂದು ಅವರು ಹೇಳಿದ್ದಾರೆ.
ಮಧ್ಯಂತರ ಜಾಮೀನು ಕೋರಿ ಮುಖ್ಯಮಂತ್ರಿ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ನ್ಯಾಯಾಲಯವು ಸೋಮವಾರ ವಿಚಾರಣೆ ಮಾಡುವ ಸಾಧ್ಯತೆಯಿದೆ. ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಕೋರಿ ಅವರು ಸಲ್ಲಿಸಿದ ಅರ್ಜಿಯ ತುರ್ತು ಪಟ್ಟಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಬುಧವಾರ ನಿರಾಕರಿಸಿತ್ತು.
ಕಿಡ್ನಿ, ಕ್ಯಾನ್ಸರ್, ಗಂಭೀರ ಹೃದಯ ಸಂಬಂಧಿ ಕಾಯಿಲೆಗಳನ್ನು ಸೂಚಿಸುವ “ಹಠಾತ್ ತೂಕ ಇಳಿಕೆ ಮತ್ತು ಹೆಚ್ಚಿನ ಕೀಟೋನ್ ಮಟ್ಟ” ದ ದೃಷ್ಟಿಯಿಂದ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಹಲವಾರು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ತಮ್ಮ ಮಧ್ಯಂತರ ಜಾಮೀನಿನ ವಿಸ್ತರಣೆಯನ್ನು ಮುಖ್ಯಮಂತ್ರಿ ಕೇಜ್ರಿವಾಲ್ ಕೋರಿದ್ದರು.