ಕೊಚೀಂಗ್ ಸೆಂಟರ್ಗಳು ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿವೆ – ಸುಪ್ರೀಂಕೋರ್ಟ್
ನವದೆಹಲಿ : ಸ್ಮರ್ಧಾತ್ಮಕ ಪರೀಕ್ಷೆಗಳಿಗಾಗಿ ತೆರೆಯುತ್ತಿರುವ ಕೊಚೀಂಗ್ ಸೆಂಟರ್ಗಳು ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿವೆ ಮತ್ತು ಸಾವಿನ ಕೋಣೆಗಳಾಗಿ ಮಾರ್ಪಟ್ಟಿವೆ ಎಂದು ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಓಲ್ಡ್ ರಾಜೇಂದರ್ ನಗರದಲ್ಲಿನ ಕೊಚೀಂಗ್ ಸೆಂಟರ್ನ ನೆಲ ಮಹಡಿಯಲ್ಲಿ ಸಿಲುಕಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಪ್ರಕರಣದ ಸಂಬಂಧ ಸ್ವಯಂ ದೂರು ದಾಖಲಿಸಿಕೊಂಡಿದೆ.
ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸೂರ್ಯ ಕಾಂತ್ ನೇತೃತ್ವದ ಪೀಠ, ಕೋಚಿಂಗ್ ಸೆಂಟರ್ಗಳಲ್ಲಿ ಸುರಕ್ಷತಾ ನಿಯಮಗಳನ್ನು ಅಳವಡಿಸಲಾಗಿದೆಯೇ ಎಂದು ಕೇಳಿ ನ್ಯಾಯಾಲಯ ಕೇಂದ್ರ ಸರ್ಕಾರ ಮತ್ತು ದೆಹಲಿಯ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವಂತೆ ಸುಪ್ರೀಂ ಕೋರ್ಟ್ ಅಟಾರ್ನಿ ಜನರಲ್ ಅವರನ್ನು ಕೇಳಿದೆ.
ದೆಹಲಿಯ ಎನ್ಸಿಟಿ ಅಥವಾ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಯಾವ ಪರಿಣಾಮಕಾರಿ ಕ್ರಮವನ್ನು ತೆಗೆದುಕೊಂಡಿದೆ ಎಂದು ನಮಗೆ ಖಚಿತವಿಲ್ಲ. ತಮ್ಮ ವೃತ್ತಿಜೀವನಕ್ಕಾಗಿ ಕೋಚಿಂಗ್ ಸೆಂಟರ್ಗಳಿಗೆ ಸೇರಿದ ಕೆಲವು ಯುವಕರ ಜೀವನವನ್ನು ಕಸಿದುಕೊಳ್ಳುವ ದುರದೃಷ್ಟಕರ ಘಟನೆಗಳು ಎಲ್ಲರ ಕಣ್ಣು ತೆರೆಸುತ್ತವೆ ನಾವು ಎಚ್ಚರಗೊಳ್ಳುವ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.
ಜುಲೈ 27 ರಂದು ಭಾರೀ ಮಳೆಯ ನಂತರ ಪ್ರವಾಹದಿಂದಾಗಿ ಓಲ್ಡ್ ರಾಜೇಂದ್ರನಗರದಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್ನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಎಂದು ಗುರುತಿಸಲಾಗಿದೆ.