ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ, ಮೇ. 4: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ (ಮೇ 3) ಸಿಎಂಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, “ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ನಮ್ಮ ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು” ಎಂದಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಕಿಡಿಕಾರಿರುವ ರಾಹುಲ್ ಗಾಂಧಿ “ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಮೊದಲೇ ದೇವರಾಜೇಗೌಡ ಮಾಹಿತಿ ನೀಡಿದ್ದಾರೆ. ಆದರೂ ಪ್ರಜ್ವಲ್‌ಗೆ ಟಿಕೆಟ್ ನೀಡಿರುವುದು ಆಘಾತದ ವಿಷಯ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ, ಅವರು ಪ್ರಜ್ವಲ್ ಪರವಾಗಿ ಪ್ರಚಾರ ಮಾಡಿದ್ದು ಆಘಾತಕಾರಿ ಬೆಳವಣಿಗೆ” ಎಂದು ಹೇಳಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವವರ ವಿರುದ್ದ ತುಟಿ ಬಿಚ್ಚದಿರುವ ಇಂತಹ ಹಿರಿಯ ರಾಜಕಾರಣಿಯನ್ನು ನನ್ನ ಎರಡು ದಶಕಗಳ ಸಾರ್ವಜನಿಕ ಜೀವನದಲ್ಲಿ ಯಾವತ್ತೂ ನೋಡಿಲ್ಲ. ಪ್ರಜ್ವಲ್ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ. ಪ್ರಧಾನಿ ಮೋದಿ ಅವರು ಹರಿಯಾಣ ಮಹಿಳಾ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ಇದು ಮೋದಿ ಪರಿವಾರದ ಸದಸ್ಯರ ಪ್ರಕರಣ ಎಂದು ರಾಹುಲ್ ಗಾಂಧಿ ಅವರು ಟೀಕಿಸಿದ್ದಾರೆ.

ಪ್ರಜ್ವಲ್ ವಿರುದ್ದದ ಆರೋಪಗಳ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷಾ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಆರೋಪಿಯ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಪ್ರಧಾನಿಗೆ ಪತ್ರವನ್ನೂ ಬರೆದಿದ್ದೇನೆ. ಪಾಸ್‌ಪೋರ್ಟ್ ರದ್ದುಗೊಳಿಸಿ ಆದಷ್ಟು ಬೇಗ ಆರೋಪಿಯನ್ನು ವಶಕ್ಕೆ ಪಡೆಯಬೇಕಿದೆ. ಸಂತ್ರಸ್ತೆಯರಿಗೆ ಅಗತ್ಯವಿರುವ ಎಲ್ಲಾ ರೀತಿಯ ಬೆಂಬಲ ನೀಡುವಂತೆ ನಾನು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಅವರಿಗೆ ಅನ್ಯಾಯದ ವಿರುದ್ದ ಹೋರಾಡಲು ನಮ್ಮ ಬೆಂಬಲ ಬೇಕಿದೆ. ಈ ದುಷ್ಕೃತ್ಯದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರನ್ನೂ ಕಾನೂನಡಿ ತರಬೇಕಿದೆ ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

ರಾಹುಲ್ ಗಾಂಧಿಯ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಿಎಂ, “ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ” ಎಂದಿದ್ದಾರೆ.

Previous Post
ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ಒತ್ತಾಯಿಸಿ ತೆಲಂಗಾಣ ಸಿಎಂ ಭೇಟಿ ಮಾಡಿದ ರಾಧಿಕಾ ವೇಮುಲಾ
Next Post
ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

Recent News