ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಪತ್ರ
ಬೆಂಗಳೂರು, ಫೆಬ್ರವರಿ 15: ದೆಹಲಿಗೆ ಹೊರಟಿದ್ದ ಕರ್ನಾಟಕ ರಾಜ್ಯದ ರೈತರನ್ನು ವಶಕ್ಕೆ ಪಡೆದು ಪೊಲೀಸರು ವಾರಾಣಸಿಗೆ ಸ್ಥಳಾಂತರಿಸುತ್ತಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆ ಮಾಡಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕದ ರೈತರ ಗುಂಪನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಯಾವುದೇ ಕಾರಣವಿಲ್ಲದೆ ಬಂಧಿಸಲಾಗಿದೆ. ರೈತರನ್ನು ಬಂಧಿಸಿ 4 ದಿನ ಕಳೆದರೂ ಬಿಡುಗಡೆ ಮಾಡಿಲ್ಲ. ನಿಮ್ಮ ಪೊಲೀಸ್ ಅಧಿಕಾರಿಗಳು ಅವರನ್ನು ವರ್ಣಾಸಿಗೆ ಸ್ಥಳಾಂತರಿಸುತ್ತಿದ್ದಾರೆ ಎಂದು ಈಗ ತಿಳಿದುಬಂದಿದೆ.
ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಪ್ರಯಾಣಿಸುವುದು ಜನರ ಸಾಂವಿಧಾನಿಕ ಹಕ್ಕು. ಉತ್ತಮ ನೀತಿಗಳನ್ನು ಬಯಸುತ್ತಿರುವ ರೈತರನ್ನು ಮಧ್ಯಪ್ರದೇಶದಲ್ಲಿ ಪೊಲೀಸ್ ಅಧಿಕಾರಿಗಳು ಬಂಧಿಸಿ ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಹೇಳಿದ್ದಾರೆ. ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ರೈತರನ್ನು ಸ್ಥಳದಿಂದ ಸ್ಥಳಕ್ಕೆ ಸ್ಥಳಾಂತರಿಸದೆ ಕೂಡಲೇ ಬಿಡುಗಡೆ ಮಾಡುವಂತೆ ಕೋರುತ್ತೇನೆ ಎಂದು ಪತ್ರ ಬರೆದಿದ್ದಾರೆ. ಹೀಗಾಗಿ ರೈತರನ್ನು ಸ್ಥಳಾಂತರಿಸದೆ ಕೂಡಲೆ ಬಿಡುಗಡೆಗೊಳಿಸುವಂತೆ ಪತ್ರದ ಮೂಲಕ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ರೈತರ ಯೋಗಕ್ಷೇಮ ವಿಚಾರಿಸಿದರು. 70 ಕ್ಕೂ ಹೆಚ್ಚು ರೈತರ ಬಂಧನ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯದ 70 ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ದೆಹಲಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಮಧ್ಯ ಪ್ರದೇಶದ ಭೋಪಾಲ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.