ಮೇಲ್ಮನೆ ಸದಸ್ಯರ ಆಯ್ಕೆ; ಸಿಎಂ, ಡಿಸಿಎಂ ಏಕಪಕ್ಷೀಯ ನಿರ್ಧಾರ ಸೂಕ್ತವಲ್ಲ
ಬೆಂಗಳೂರು: ವಿಧಾನ ಪರಿಷತ್ ಸದಸ್ಯರ ಆಯ್ಕೆ ವಿಚಾರದಲ್ಲಿ ಸಿಎಂ,ಡಿಸಿಎಂ ಇಬ್ಬರೇ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತವಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಸಂಬಂಧ ನನ್ನನ್ನೂ ಸೇರಿ ಹಿರಿಯರು ಹಾಗೂ ಅನುಭವಿಗಳ ಜತೆ ಸಮಾಲೋಚನೆ ನಡೆಸುವುದು ಸೂಕ್ತ.ಏಕಾಏಕಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೇ ಕುಳಿತು ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಮ್ಮನ್ನೂ ಸೇರಿದಂತೆ ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಬೇಕು. ಪಕ್ಷ ಹಾಗೂ ಸರ್ಕಾರದಲ್ಲಿ ಕೆಲಸ ಮಾಡಿದವರ ಸಂಪರ್ಕದಲ್ಲಿರುವವರ ಬಗ್ಗೆ ಚರ್ಚೆ ಮಾಡಬೇಕು. ಇದರಿಂದ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.ಕೆಪಿಸಿಸಿ ಅಧ್ಯಕ್ಷರಾಗಿದ್ದವರು, ಪಕ್ಷದಲ್ಲಿ ಅನೇಕ ಜವಾಬ್ದಾರಿ ನಿಭಾಯಿಸಿ ಅನುಭವಿಗಳಾಗಿರುವವರ ಸಲಹೆ ಸೂಚನೆಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾವಾರು, ಜಾತಿವಾರು ಹಾಗೂ ಪಕ್ಷ ಸಂಘಟನೆಯಲ್ಲಿ ಸಹಾಯ ಮಾಡಿದವರು ಯಾವ ಜಾತಿ ಕಾಂಗ್ರೆಸ್ ಜತೆ ದೃಢವಾಗಿ ನಿಂತಿದೆ ಎಂಬುದನ್ನು ಚರ್ಚೆ ಮಾಡಬೇಕು ಎಂದರು.ಸರ್ಕಾರದ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಬೇಕು. ಜಿಲ್ಲಾ ಪ್ರವಾಸದಲ್ಲೂ ಜಿಲ್ಲಾ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಜತೆ ಚರ್ಚೆ ಮಾಡಬೇಕು ಎಂಬುದು ಹೊಸದಲ್ಲ. ಈ ಹಿಂದೆ ನಾನು ಎಂಟು ವರ್ಷ ಪಕ್ಷದ ಅಧ್ಯಕ್ಷನಾಗಿದ್ದಾಗ ಇದೇ ಕೆಲಸ ಮಾಡಿದ್ದೇನೆ. ಇತ್ತಿಚೆಗೆ ಸಚಿವರು ಪಕ್ಷದ ಕಚೇರಿಯತ್ತ ಬರುತ್ತಿರಲಿಲ್ಲ ಎಂಬುದನ್ನು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಮನಿಸಿದ್ದಾರೆ. ಹಾಗಾಗಿ ಈ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಬಂಧನದ ವಿಚಾರದಲ್ಲಿ ಸರ್ಕಾರದಿಂದ ಯಾವುದೇ ವಿಳಂಬವಾಗಿಲ್ಲ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮೇ 31ಕ್ಕೆ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಂತ್ಯವಾಗಲಿದೆ. ಸಂಸದ ಸ್ಥಾನ ಅಂತ್ಯವಾದರೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಕೂಡ ರದ್ದಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಾಪಸ್ ಆಗಲಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ. ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.