ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು,ಮೇ 30 : “ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿದ ನಂತರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು. ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ವಿರೋಧ ಪಕ್ಷಗಳು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿವೆ ಎಂದು ಕೇಳಿದಾಗ ಅವರು, “ರಾಜೀನಾಮೆ ಕೇಳುವುದು ವಿರೋಧ ಪಕ್ಷಗಳ ಧರ್ಮ, ಕೇಳುತ್ತಾರೆ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ. ಆಧಾರವಿಲ್ಲದೇ ಆರೋಪ ಮಾಡಿದ ಮಾತ್ರಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ತಪ್ಪು ಯಾರೇ ಮಾಡಿದರೂ ತಪ್ಪೇ. ತಕ್ಷಣವೇ ಎಫ್ಐಆರ್ ದಾಖಲಿಸಿ, ವ್ಯವಸ್ಥಾಪಕ ನಿರ್ದೇಶಕರ ಅಮಾನತು ಮಾಡಲಾಗಿದೆ. ತಪ್ಪು ಮಾಡಿರುವುದು ಸಾಬೀತಾದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು” ಎಂದರು.

ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆ ಕೇಳಿದ್ದೀರಿ, ಈಗ ಬಿಜೆಪಿ ಕೂಡ ಈ ವಿಚಾರದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿದೆ ಎಂದಾಗ, “ಆತ್ಮಹತ್ಯೆ ಪತ್ರದಲ್ಲಿ ಸಚಿವರ ಮೌಖಿಕ ಆದೇಶವಿದೆ ಎಂದು ಅಧಿಕಾರಿಗಳು ಹೇಳಿದ್ದರು ಎಂದು ಇದೆ. ನಾಗೇಂದ್ರ ಅವರ ವಿರುದ್ಧ ನೇರ ಆರೋಪವಿಲ್ಲ. ಈ ವಿಚಾರವಾಗಿ ಸರ್ಕಾರ ತನಿಖೆ ಮಾಡಲಿದೆ. ಇದು ಸಣ್ಣ ವಿಚಾರವಲ್ಲ. 10 ಲಕ್ಷ ಅಕ್ರಮ ನಡೆದರೂ ಅಕ್ರಮವೇ. ನಾನು ಪ್ರಕರಣದ ಎಫ್ಐಆರ್ ಓದಿದೆ.  ಸಚಿವರನ್ನು ಕರೆಸಿ ಮಾಹಿತಿ ಪಡೆಯುತ್ತೇವೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ” ಎಂದರು.

65 ಮಂದಿ ಶಾರ್ಟ್ ಲಿಸ್ಟ್:

ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಯತೀಂದ್ರ ಅವರ ವಿಚಾರವಾಗಿ ಹೈಕಮಾಂಡ್ ನಾಯಕರು ಈಗಾಗಲೇ ಮಾತು ಕೊಟ್ಟಿದ್ದರು. ಕೇವಲ ಬೆಂಗಳೂರು ಮಾತ್ರವಲ್ಲದೇ ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಗಳಿಂದಲೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ.  ಮಂಗಳೂರಿನಲ್ಲಿ 21, ಚಿಕ್ಕಮಗಳೂರಿನಲ್ಲಿ 9 ಮಂದಿ ಆಕಾಂಕ್ಷಿಗಳಿದ್ದಾರೆ. ಹಿರಿಯರ ಅಭಿಪ್ರಾಯ ಕೇಳಬೇಕಿತ್ತು ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವು ಅವರ ಅಭಿಪ್ರಾಯ ಕೇಳಿದ್ದೇವೆ. ಪರಮೇಶ್ವರ ಅವರು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ” ಎಂದರು. ಆಯ್ಕೆ ಮಾನದಂಡ ಏನು ಎಂದು ಕೇಳಿದಾಗ, “ಸಂಘಟನೆಗೆ ಆದ್ಯತೆ ನೀಡಲಾಗುವುದು. ಅನೇಕ ಪ್ರಮುಖರು, ಹಿರಿಯರು ಹಾಗೂ ಚುನಾವಣೆಯಲ್ಲಿ ಸೋತವರು, ವಿಧಾನಸಭೆ ಟಿಕೆಟ್ ತ್ಯಾಗ ಮಾಡಿರುವವರು ಟಿಕೆಟ್ ಕೇಳಿದ್ದು, ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ” ಎಂದರು. ಬೋಸರಾಜು ಅವರು ಮುಂದುವರಿಯುತ್ತಾರಾ ಎಂದು ಕೇಳಿದಾಗ, “ಈ ವಿಚಾರವಾಗಿ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ” ಎಂದರು. ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ” ಎಂದರು.

 

Previous Post
ಮೋದಿ ಕೋಮು ಭಾವನೆ ಕೆರೆಳಿಸುವ ಭಾಷಣ ಮಾಡಿದರೆ ಹೊರತು ಜನರ ಸಮಸ್ಯೆ ಬಗ್ಗೆ ಮಾತನಾಡಲಿಲ್ಲ – ಖರ್ಗೆ
Next Post
ಗೆಲುವಿನ ವಿಶ್ವಾಸದಲ್ಲಿರುವ ಎನ್‌ಡಿಎ ಜೂನ್ 9 ರಂದು ಪ್ರಮಾಣವಚನ ಕಾರ್ಯಕ್ರಮಕ್ಕೆ ತಯಾರಿ

Recent News