ಸರಣಿ ಭಯೋತ್ಪಾದಕ ದಾಳಿ, ಸಭೆ ನಡೆಸಿದ ಅಮಿತ್ ಶಾ
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಭಯೋತ್ಪಾದಕ ದಾಳಿಗಳು ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಎರಡನೇ ಅವಧಿಗೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಪ್ರಧಾನಮಂತ್ರಿ ಸೂಚನೆಗೆ ಮೇರೆಗೆ ಅವರು ಪ್ರತಿಕ್ರಮಗಳ ಕ್ರಮಗಳ ಪರಿಶೀಲನೆ ನಡೆಸಿದರು.
ಅಮರನಾಥ ಯಾತ್ರೆಯ ಸಿದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಪರಿಶೀಲಿಸಲು ಶಾ ಜೂನ್ 16 ರಂದು ನಾರ್ತ್ ಬ್ಲಾಕ್ನಲ್ಲಿ ಸಭೆ ನಡೆಸಲಿದ್ದಾರೆ. ಈ ಭಾಗದಲ್ಲೂ ಭಯೋತ್ಪಾದಕ ದಾಳಿಗಳು ನಡೆಯುವ ಸಾಧ್ಯತೆ ಇರುವ ಹಿನ್ನಲೆ ಮುನ್ನಚ್ಚರಿಕೆ ಕ್ರಮವಾಗಿ ಭದ್ರತೆ ನಿಯೋಜಿಸುವ ಬಗ್ಗೆ ಚರ್ಚೆ ನಡೆಸಲಿದೆ.
ಅಮಿತ್ ಶಾ ನೇತೃತ್ವದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವೇಲ್ ಕೂಡಾ ಭಾಗಿಯಾಗಿದ್ದರು. ಭದ್ರತಾ ಪಡೆಗಳ ನಿಯೋಜನೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿದರು ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ಹೇಳಿವೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಮೂರು ದಿನಗಳಲ್ಲಿ ಮೂರು ಭಯೋತ್ಪಾದಕ ಸಂಬಂಧಿತ ಘಟನೆಗಳಿಗೆ ಸಾಕ್ಷಿಯಾಗಿದ್ದು, ಕಣಿವೆಯಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.