ದೆಹಲಿಯಲ್ಲಿ ಜೆಪಿ ನಡ್ಡಾ ಭೇಟಿಯಾದ ವಿಜಯೇಂದ್ರ
ದೆಹಲಿ, ಫೆಬ್ರವರಿ 09: ಲೋಕಸಭಾ ಚುನಾವನೆ ಸಮೀಪಿಸುತ್ತಿದ್ದಂತೆ ರಾಜ್ಯ ಕಮಲ ಪಾಳಯ ಫುಲ್ ಆಕ್ಟಿವ್ ಆಗಿದೆ. ನಾಳೆ(ಶನಿವಾರ) ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಆಗಮಿಸಲಿದ್ದು, ಇಂದು( ಶುಕ್ರವಾರ) ಬಿಜೆಪಿ ರಾಜ್ಯಾಧ್ಯಕ್ಷ ಬಿಜ ವೈ ವಿಜಯೇಂದ್ರ ಅವರು ದೆಹಲಿಯಲ್ಲಿ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾಗಿದ್ದಾರೆ. ಹೌದು, ದೆಹಲಿಯಲ್ಲಿ ಜೆ ಪಿ ನಡ್ಡಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಮೈತ್ರಿ ವಿಚಾರ, ರಾಜ್ಯದಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಚುನಾವಣಾ ಸಿದ್ಧತಾ ಕಾರ್ಯಗಳ ಕುರಿತು ಮಾಹಿತಿ ಒದಗಿಸಿ ಚರ್ಚಿಸಲಾಯಿತು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಇನ್ನೂ ಲೋಕಸಭೆ ಹಾಗೂ ರಾಜ್ಯ ಸಭೆ ತಯಾರಿಯಲ್ಲಿರುವ ರಾಜ್ಯ ಬಿಜೆಪಿ ನಾಯಕರು, ಅಭ್ಯರ್ಥಿ ಆಯ್ಕೆ ವಿಚಾರ ಹಾಗೂ ರಾಜ್ಯಸಭೆಗೆ ಯಾರನ್ನ ಆಯ್ಕೆ ಮಾಡಬೇಕು ಎನ್ನುವ ಕುರಿತು ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿದ್ದು, ಈ ವಿಚಾರವಾಗಿಯೂ ಜೆ ಪಿ ನಡ್ಡಾ ಅವರ ಜತೆಗೆ ಚರ್ಚೆಲಾಗಿದೆ ಎಂದು ತಿಳಿದು ಬಂದಿದೆ. ಇತ್ತ ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗುತ್ತಿರುವ ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
ದೆಹಲಿಯಲ್ಲಿ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾದ ಬಳಿಕ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಭೇಟಿಯಾದರು. ಇದೇ ವೇಳೆ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಸಂಸದರಾದ ಪಿಸಿ ಗದ್ದಿಗೌಡರ್, ಪಿಸಿ ಮೋಹನ್ ಕೂಡ ಉಪಸ್ಥಿತರಿದ್ದರು.
ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರು ಹಾಗೂ ಹಿರಿಯರಾದ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಚರ್ಚಿಸಿ ಮಾಹಿತಿ ಒದಗಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಸಂಸದರು, ಮಾಜಿ ಸಂಸದರು ಹಾಗೂ ಮಾಜಿ ಸಚಿವರುಗಳು ಉಪಸ್ಥಿತರಿದ್ದರು ಎಂದು ವಿಜಯೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.