ಸಾರ್ವಜನಿಕ ಕ್ಷಮೆಯಾಚನೆಗೆ ಸಿದ್ದ ಸುಪ್ರೀಂಕೋರ್ಟ್‌ನಲ್ಲಿ ಬಾಬಾ ರಾಮ್‌ದೇವ್, ಬಾಲಕೃಷ್ಣ ಹೇಳಿಕೆ

ಸಾರ್ವಜನಿಕ ಕ್ಷಮೆಯಾಚನೆಗೆ ಸಿದ್ದ; ಸುಪ್ರೀಂ ಕೋರ್ಟ್‌ನಲ್ಲಿ ಬಾಬಾ ರಾಮ್‌ದೇವ್, ಬಾಲಕೃಷ್ಣ ಹೇಳಿಕೆ

ನವದೆಹಲಿ : ಸುಪ್ರೀಂಕೋರ್ಟ್‌ಗೆ ಖುದ್ದಾಗಿ ಹಾಜರಾದ ಪತಂಜಲಿ ಆಯುರ್ವೇದ ಲಿಮಿಟೆಡ್‌ನ ಸಹ-ಸಂಸ್ಥಾಪಕ ಬಾಬಾ ರಾಮ್‌ದೇವ್, ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮತ್ತು ಅಲೋಪತಿ ಔಷಧಿಗಳ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಇದೇ ವೇಳೆ ಪತಂಜಲಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಕೂಡ ನ್ಯಾಯಾಲಯಕ್ಕೆ ಖುದ್ದಾಗಿ ಕ್ಷಮೆ ಯಾಚಿಸಿದ್ದಾರೆ. ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಪತಂಜಲಿಯ ಇಬ್ಬರೂ ಮುಖ್ಯಸ್ಥರು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಸಿದ್ಧರಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾ. ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು ತಪ್ಪು ದಾರಿಗೆಳೆಯುವ ಜಾಹೀರಾತಿಗೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಲಿಮಿಟೆಡ್‌, ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮ್‌ದೇವ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ. ಮಂಗಳವಾರ ನಡೆದ ವಿಚಾರಣೆಯಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಿತು ಮತ್ತು ನ್ಯಾಯಾಲಯಕ್ಕೆ ನೀಡಲಾದ ಭರವಸೆಯನ್ನು ಉಲ್ಲಂಘಿಸಿದ್ದು ಏಕೆ? ಎಂದು ಪ್ರಶ್ನಿಸಿದೆ. ಪೀಠವು ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿದೆ.

ಏಪ್ರಿಲ್ 2ರಂದು, ಪತಂಜಲಿ ಎಂಡಿ ಸಲ್ಲಿಸಿದ ಕ್ಷಮಾಪಣೆಯ ಮೊದಲ ಅಫಿಡವಿಟ್ ಅನ್ನು ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತ್ತು. ಕಳೆದ ವಾರ (ಏಪ್ರಿಲ್ 10), ಪತಂಜಲಿ ಎಂಡಿ ಸಲ್ಲಿಸಿದ್ದ ಕ್ಷಮಾಪಣೆಯ ಎರಡನೇ ಅಫಿಡವಿಟ್ ಅನ್ನೂ ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತ್ತು. ನ್ಯಾಯಾಲಯದ ಮುಂದೆ ವೈಯಕ್ತಿಕವಾಗಿ ಹಾಜರಾಗುವುದನ್ನು ತಪ್ಪಿಸಲು ಬಾಲಕೃಷ್ಣ ಮತ್ತು ರಾಮ್‌ದೇವ್ ಅವರು ಅಸ್ತಿತ್ವದಲ್ಲಿಲ್ಲದ ವಿಮಾನ ಟಿಕೆಟ್‌ಗಳೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು.

ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ 1954 ರ ಅಡಿಯಲ್ಲಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಉತ್ತರಾಖಂಡ ರಾಜ್ಯದ ಅಧಿಕಾರಿಗಳನ್ನು ನ್ಯಾಯಾಲಯವು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಅಲೋಪತಿಯ ವಿರುದ್ಧದ ಪತಂಜಲಿಯ ಜಾಹೀರಾತುಗಳು ಮತ್ತು ಕೆಲ ರೋಗಗಳನ್ನು ಗುಣಪಡಿಸುವ ಬಗ್ಗೆ ಹಕ್ಕುಗಳನ್ನು ನೀಡುವುದರ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನಿರಂತರವಾಗಿ ಪ್ರಕಟಿಸಿದ್ದಕ್ಕಾಗಿ, ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು ಈ ಹಿಂದೆ ಪತಂಜಲಿ ಆಯುರ್ವೇದ, ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮ್‌ದೇವ್ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು.

Previous Post
ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ ಜೈಲು ಅಧಿಕಾರಿಗಳ ವರ್ತನೆಗೆ ಸಂಜಯ್ ಸಿಂಗ್ ಗರಂ
Next Post
ಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ ಸಾಧನ – ರಾಹುಲ್ ಗಾಂಧಿ ಆರೋಪ

Recent News