ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆಯಾಗಬೇಕು ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಪ್ರತಿಕ್ರಿಯೆ
ನವದೆಹಲಿ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದು ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಈ ಘಟನೆಗೆ ರಾಜ್ಯ ಸರ್ಕಾರವೇ ನೇರವಾದ ಹೊಣೆ ಎಂದು ದೂರಿದ್ದಾರೆ.
ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ವಿದೇಶಕ್ಕೆ ಹಾರಲು ಕೇಂದ್ರ ಸರ್ಕಾರ ಸಹಕಾರ ಇದೆ ಎಂಬ ರಾಜ್ಯ ಕಾಂಗ್ರೆಸ್ ಸರ್ಕಾರದ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮೋದಿ ತಿರುಗೇಟು ನೀಡಿ ಆರೋಪಗಳ ಸುರಿಮಳೆಗೈದಿದ್ದಾರೆ. ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದೇವೆ. ಈ ರೀತಿಯ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಪ್ರಜ್ವಲ್ ದೇಶದಿಂದ ಹೊರಹೋಗಲು ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ.ಇದು ಕಾನೂನು ಸುವವ್ಯವಸ್ಥೆಗೆ ಸಂಬಂಧಿಸಿದ ವಿಷಯವಾದ ಕಾರಣ ಕ್ರಮ ವಹಿಸುವ ಜವಾಬ್ಧಾರಿಯು ಸರ್ಕಾರದ ಮೇಲಿದೆ ಎಂದು ಹೇಳಿದರು.
ಸಹಸ್ರಾರು ವಿಡಿಯೋಗಳು ಇದೆ ಎಂದಾದರೆ ಅವು ಜೆಡಿಎಸ್ ಪಕ್ಷವು ಕಾಂಗ್ರಸ್ಸಿನ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದ ಅವಧಿಗೆ ಸೇರಿದೆ ಎನ್ನುವುದು ಗೊತ್ತಾಗುತ್ತಿದೆ. ಅವರು ಅಧಿಕಾರದಲ್ಲಿದ್ದಾಗ ವಿಡಿಯೋಗಳನ್ನ ಸಂಗ್ರಹಿಸಿದ್ದರು. ಒಕ್ಕಲಿಗರು ಮತದಾನ ಹಕ್ಕನ್ನು ಚಲಾಯಿಸಿದ ನಂತರ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ. ಪ್ರಜ್ವಲ್ ಅವರನ್ನು ದೇಶದಿಂದ ಹೊರಗೆ ಕಳುಹಿಸಿದ ಮೇಲೆಯೇ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ಬೆಳವಣಿಗೆ ಬಹಳ ಅನುಮಾನಾಸ್ಪದ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಬಳಿ ಮಾಹಿತಿ ಇದ್ದಿದ್ದರೆ ಅದರ ಬಗ್ಗೆ ಒಂದು ಕಣ್ಣಿಡಬೇಕಿತ್ತು. ವಿಮಾನ ನಿಲ್ದಾಣಗಳಲ್ಲಿ ನಿಗಾ ಇಡಬೇಕಿತ್ತು. ರಾಜ್ಯ ಸರ್ಕಾರ ಏನನ್ನೂ ಮಾಡಲಿಲ್ಲ. ಕೇಂದ್ರ ಸರ್ಕಾರಕ್ಕೂ ಯಾವುದೇ ಮಾಹಿತಿ ನೀಡಲಿಲ್ಲ. ಇದರ ಅರ್ಥ ಸ್ಪಷ್ಟ ಇದೆಲ್ಲ ರಾಜಕೀಯ ಆಟ. ಇದು ಅವರು ಹೊಂದಾಣಿಕೆ ಮಾಡಿಕೊಂಡಿದ್ದ ಅವಧಿಗೆ ಸೇರಿದ್ದ ವಿಡಿಯೋಗಳು ಎನ್ನುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿತ್ತು ಎಂದು ಕಟುಮಾತಿನಲ್ಲಿ ಕರ್ನಾಟಕ ಸರ್ಕಾರವನ್ನು ತಿವಿದಿದ್ದಾರೆ.
ಅಪರಾಧಿಗಳನ್ನ ಬಿಡಬಾರದು. ನಮ್ಮ ದೇಶದಲ್ಲಿ ಇಂತಹ ಆಟಗಳನ್ನ ಕೊನೆಗೊಳಿಸಬೇಕು. ಮೋದಿಗೆ ಸಂಬಂಧಿಸಿದಂತೆ, ಬಿಜೆಪಿಗೆ ಸಂಬಂಧಿಸಿದಂತೆ, ಸಂವಿಧಾನಕ್ಕೆ ಸಂಬಂಧಿಸಿದಂತೆ ನಮ ದೃಷ್ಟಿಕೋನ ಬಹಳ ಸ್ಪಷ್ಟವಾಗಿದೆ. ಇಂತಹ ವ್ಯಕ್ತಿಗಳ ವಿರುದ್ಧ ತುಸು ಸಹನೆ ಕೂಡ ತೋರಬಾರದು. ಕಾನೂನಡಿಯ ಎಲ್ಲಾ ಆಯ್ಕೆಗಳನ್ನು ಬಳಕೆ ಮಾಡಿ ಕಠಿಣ ಶಿಕ್ಷೆ ನೀಡಬೇಕು. ಪ್ರಜ್ವಲ್ ಅವರನ್ನು ವಾಪಸ್ ಕರೆತಂದು ಕಠಿಣ ಕ್ರಮ ಆಗಬೇಕು ಎಂದು ಮೋದಿ ಆಗ್ರಹಿಸಿದರು.