ಹತ್ರಾಸ್ನಲ್ಲಿ ಕಾಲ್ತುಳಿತದಲ್ಲಿ ಮೃತರಾದ ಕುಟುಂಬಸ್ಥರನ್ನ ಭೇಟಿ ಪರಿಹಾರದ ಮೊತ್ತ ಹೆಚ್ಚಿಸಲು ರಾಹುಲ್ ಗಾಂಧಿ ಒತ್ತಾಯ
ಅಲಿಘಡ್ : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಕಾಲ್ತುಳಿತ ಸಂಭವಿಸಿ ಮೃತರಾದ ಕುಟುಂಬಸ್ಥರನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಕಾಂಗ್ರೇಸ್ ನಾಯಕರೊಂದಿಗೆ ಅಲಿಘಡ್ ಗೆ ತೆರಳಿದ ಅವರು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ವೇಳೆ ಸಂತ್ರಸ್ತರ ಕುಟುಂಬಸ್ಥರು ರಾಹುಲ್ ಗಾಂಧಿಯವರ ಬಳಿ ಆಸ್ಪತ್ರೆ ಹಾಗೂ ವೈದ್ಯಕೀಯ ಸೌಲಭ್ಯಗಳ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಸರಿಯಾದ ವೈದ್ಯಕೀಯ ಸೌಲಭ್ಯವಿದ್ದರೆ ನಮ್ಮ ಕುಟುಂಬಸ್ಥರನ್ನು ಉಳಿಸಿಕೊಳ್ಳಬಹುದಿತ್ತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿಯವರು ಪಕ್ಷದ ವತಿಯಿಂದ ಸಾಧ್ಯವಾದಷ್ಟು ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೇ ಈ ರೀತಿಯ ಘಟನೆಗಳು ನಡೆಯದಂತೆ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇವೆ ಎಂದಿದ್ದಾರೆ.
ಕಾಲ್ತುಳಿತ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ರಾಹುಲ್ ಗಾಂಧಿ, ನಾನು ಈ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ, ಆದರೆ ಆಡಳಿತದ ಕಡೆಯಿಂದ ಲೋಪಗಳಿವೆ ಮತ್ತು ಮೃತರ ಕುಟುಂಬಗಳು ಬಡವರಾಗಿದ್ದು ಗರಿಷ್ಠ ಪರಿಹಾರವನ್ನು ನೀಡಬೇಕು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಕ್ತ ಮನಸ್ಸಿನಿಂದ ಪರಿಹಾರ ನೀಡುವಂತೆ ಕೋರುತ್ತೇನೆ ಎಂದರು.
ಈ ನಡುವೆ ಬೋಧಕ ಭೋಲೆ ಬಾಬಾ ಅವರ ಸತ್ಸಂಗದ ಸಂಘಟನಾ ಸಮಿತಿಯ ಆರು ಸದಸ್ಯರನ್ನು ಉತ್ತರ ಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಎಫ್ಐಆರ್ನಲ್ಲಿ ಹೆಸರಿಸಲಾದ ಏಕೈಕ ಆರೋಪಿ ತಲೆಮರೆಸಿಕೊಂಡಿದ್ದು, ನಾರಾಯಣ ಸಕರ್ ಹರಿ ಮತ್ತು ಭೋಲೆ ಬಾಬಾ ಎಂದೂ ಕರೆಯಲ್ಪಡುವ ಸೂರಜ್ಪಾಲ್ನನ್ನು ತನಿಖೆಯ ಸಮಯದಲ್ಲಿ ಅಗತ್ಯವಿದ್ದಲ್ಲಿ ಪ್ರಶ್ನಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸ್ ಮಹಾನಿರೀಕ್ಷಕ ಶಲಭ್ ಮಾಥುರ್ ಮಾತನಾಡಿ, ನಾಪತ್ತೆಯಾಗಿರುವ ಆರೋಪಿಯ ಹುಡುಕಾಟ ನಡೆಸಲಾಗುತ್ತಿದೆ. ಸುಳಿವು ನೀಡಿದರಿಗೆ 1 ಲಕ್ಷ ಬಹುಮಾನವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದರು. ಬಂಧಿತರನ್ನು ರಾಮ್ ಲಡೈತೆ (50), ಉಪೇಂದ್ರ ಸಿಂಗ್ ಯಾದವ್ (62), ಮೇಘ್ ಸಿಂಗ್ (61), ಮುಖೇಶ್ ಕುಮಾರ್ (38), ಮತ್ತು ಮಹಿಳೆಯರಾದ ಮಂಜು ಯಾದವ್ (30) ಮತ್ತು ಮಂಜು ದೇವಿ (40) ಎಂದು ಪೊಲೀಸರು ಗುರುತಿಸಿದೆ ಎಂದರು.
ಉತ್ತರ ಪ್ರದೇಶ ಸರ್ಕಾರವು ಹತ್ರಾಸ್ ದುರಂತದ ತನಿಖೆಗಾಗಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸಿದೆ. ಕಾಲ್ತುಳಿತದ ಹಿಂದೆ ಪಿತೂರಿ ಇರುವ ಸಾಧ್ಯತೆಯನ್ನು ಪರಿಶೀಲಿಸುತ್ತದೆ. ಈಗಾಗಲೇ ಮೃತರಿಗೆ ನಾಲ್ಕು ಲಕ್ಷ ಮತ್ತು ಗಾಯಾಳುಗಳಿಗೆ ಒಂದು ಲಕ್ಷ ಪರಿಹಾರ ನೀಡಿದೆ.