ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂಸರಿದ ನ್ಯಾ. ಸಂಜೀವ್ ಖನ್ನಾ
ನವದೆಹಲಿ, ಜು. 11: ಸಲಿಂಗ ಜೋಡಿಯು ವಿವಾಹವಾಗುವ ಅಥವಾ ಸಿವಿಲ್ ಯೂನಿಯನ್ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಹೊಂದುವ ಕಾನೂನಾತ್ಮಕ ಹಕ್ಕಿನ ಕೋರಿಕೆಗೆ ಮಾನ್ಯತೆ ನೀಡಲು ನಿರಾಕರಿಸಿ ಅಕ್ಟೋಬರ್ 2023ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯಿಂದ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಿಂದೆ ಸರಿದಿದ್ದಾರೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ನ್ಯಾಯಮೂರ್ತಿಗಳ ಕೊಠಡಿಯಲ್ಲಿ ಬುಧವಾರ ಮರುಪರಿಶೀಲನಾ ಅರ್ಜಿಯ ವಿಚಾರಣೆ ಆರಂಭಿಸಿದ ವೇಳೆ ನ್ಯಾ. ಖನ್ನಾ ಅವರು ಈ ವಿಚಾರ ತಿಳಿಸಿದರು. ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಜುಲೈ 9ರಂದು ಹಿರಿಯ ವಕೀಲ ನೀರಜ್ ಕಿಶನ್ ಕೌಲ್ ಅವರು ಸುಪ್ರೀಂ ಕೋರ್ಟ್ಗೆ ಕೋರಿದ್ದರು. ಇದಕ್ಕೆ ಸಿಜೆಐ ಸಮ್ಮತಿಸಿರಲಿಲ್ಲ. ಪ್ರಕರಣದ ವಿಚಾರಣೆಯನ್ನು ಜುಲೈ 10ರಂದು ಮಧ್ಯಾಹ್ನ 1.30ಕ್ಕೆ ಸಿಜೆಐ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಗೌಪ್ಯವಾಗಿ ನಡೆಸುವುದಾಗಿ ತಿಳಿಸಿತ್ತು.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಹಾಗೂ ಪಿ ಎಸ್ ನರಸಿಂಹ ಅವರಿದ್ದ ಸಾಂವಿಧಾನಿಕ ಪೀಠ ಅಕ್ಟೋಬರ್ 17, 2023ರಂದು ಸಲಿಂಗ ವಿವಾಹ ಮಾನ್ಯತೆ ವಿರುದ್ಧ ತೀರ್ಪು ನೀಡಿತ್ತು. ಪ್ರಸ್ತುತ ಇರುವ ಕಾನೂನು ಸಲಿಂಗ ಜೋಡಿ ವಿವಾಹವಾಗುವುದಕ್ಕೆ ಅಥವಾ ಸಿವಿಲ್ ಯೂನಿಯನ್ ಮದುವೆಗೆ ಸಮ್ಮತಿ ಸೂಚಿಸುವುದಿಲ್ಲ. ಹಾಗೆ ಸಮ್ಮತಿ ನೀಡುವ ಕಾನೂನು ರೂಪಿಸುವುದು ಸಂಸತ್ತಿಗೆ ಬಿಟ್ಟ ವಿಚಾರ. ಅಲ್ಲದೆ ಅಸ್ತಿತ್ವದಲ್ಲಿರುವ ಕಾನೂನಿನಡಿಯಲ್ಲಿ ಸಲಿಂಗ ಜೋಡಿಗೆ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಹಕ್ಕಿಲ್ಲ ಎಂದು ನ್ಯಾಯಾಲಯ ಹೇಳಿತ್ತು.
ನ್ಯಾ. ಭಟ್, ಕೊಹ್ಲಿ ಹಾಗೂ ನರಸಿಂಹ ಅವರು ಬಹುಮತದ ತೀರ್ಪು ನೀಡಿದರೆ, ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಕೌಲ್ ಅಲ್ಪಮತದ ತೀರ್ಪಿತ್ತಿದ್ದರು. ಮದುವೆಯಾಗುವುದು ಪರಿಪೂರ್ಣ ಹಕ್ಕು ಎನ್ನಲಾಗದು ಮತ್ತು ಸಲಿಂಗ ಜೋಡಿ ಅದನ್ನು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಲಾಗದು ಎಂದು ಪೀಠದ ಎಲ್ಲಾ ನ್ಯಾಯಮೂರ್ತಿಗಳು ತಿಳಿಸಿದ್ದರು. ವಿಶೇಷ ವಿವಾಹ ಕಾಯಿದೆಯ ಸೆಕ್ಷನ್ಗಳನ್ನು ಪ್ರಶ್ನಿಸಿದ್ದನ್ನು ನ್ಯಾಯಾಲಯ ಸರ್ವಾನುಮತದಿಂದ ತಿರಸ್ಕರಿಸಿತ್ತು.