NTT ಡೇಟಾದಿಂದ 2 ಬಿಲಿಯನ್ ಡಾಲರ್, ಆ್ಯಬ್ ಸಮೂಹದಿಂದ 400 ಕೋಟಿ ರೂ. ಹೂಡಿಕೆಗೆ ಅಸ್ತು: ಎಂಬಿಪಿ

NTT ಡೇಟಾದಿಂದ 2 ಬಿಲಿಯನ್ ಡಾಲರ್, ಆ್ಯಬ್ ಸಮೂಹದಿಂದ 400 ಕೋಟಿ ರೂ. ಹೂಡಿಕೆಗೆ ಅಸ್ತು: ಎಂಬಿಪಿ

ದಾವೋಸ್, ಜ. 18: ಸ್ವಿಟ್ಜರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದ ಮೂರನೆಯ ದಿನ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದ ನಿಯೋಗವು ಎಚ್.ಪಿ., ಆ್ಯಬ್ ಇನ್ಬೇವ್ ಬ್ರೂವರೀಸ್, ಎಚ್.ಸಿ.ಎಲ್, ಗೆನಾತ್ರಿ (ಪೆಟ್ರೋನಾಸ್), ಎನ್.ಟಿ.ಟಿ. ಡೇಟಾ, ಸಿಸ್ಕೋ, ಸ್ವಿಗ್ಗಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿದೆ.

ಈ ಬಗ್ಗೆ ಅಲ್ಲಿಂದ ಮಾಹಿತಿ ನೀಡಿರುವ ಸಚಿವ ಪಾಟೀಲ ಅವರು, `ಪಾನೀಯಗಳ ತಯಾರಿಕೆಗೆ ಹೆಸರಾಗಿರುವ ಆ್ಯಬ್ ಇನ್ಬೇವ್ ಇಂಡಿಯಾ ಕಂಪನಿಯು ರಾಜ್ಯದಲ್ಲಿ ತನ್ನ ಉತ್ಪಾದನೆ ಹೆಚ್ಚಿಸಲು 400 ಕೋಟಿ ರೂ. ಹೂಡಲು ಒಪ್ಪಿಕೊಂಡಿದೆ. ಜೊತೆಗೆ, ಈಗಾಗಲೇ ರಾಜ್ಯದಲ್ಲಿ 900 ಮಿಲಿಯನ್ ಡಾಲರ್ ಹೂಡಿಕೆ ಮಾಡಿರುವ ಎನ್.ಟಿ.ಟಿ. ಡೇಟಾ ಕಂಪನಿಯು ಮುಂಬರುವ ವರ್ಷಗಳಲ್ಲಿ ನಮ್ಮಲ್ಲಿ ಇನ್ನೂ 2 ಬಿಲಿಯನ್ ಡಾಲರ್ ಬಂಡವಾಳ ತೊಡಗಿಸಲು ತೀರ್ಮಾನಿಸಿದೆ’ ಎಂದು ತಿಳಿಸಿದ್ದಾರೆ.

ಎಚ್.ಪಿ. (ಹ್ಯೂಲೆಟ್ ಪೆಕಾರ್ಡ್) ಕಂಪನಿಯು ಇನ್ನೂ 4,000 ಉದ್ಯೋಗಗಳನ್ನು ಸೃಷ್ಟಿಸಲು ನಿರ್ಧರಿಸಿದ್ದು, ಬೆಂಗಳೂರಿನ ಮಹದೇವಪುರದಲ್ಲಿ ಹೊಸದಾಗಿ ಎರಡು ಸುಸಜ್ಜಿತ ಕಚೇರಿಗಳನ್ನು ಆರಂಭಿಸಲಿದೆ. ಜೊತೆಗೆ ಮೈಸೂರಿನಲ್ಲಿ ಸರ್ವರ್ ತಯಾರಿಕಾ ಘಟಕ ಆರಂಭಿಸಲು ಅದು ಮಾತುಕತೆ ನಡೆಸುತ್ತಿದೆ. ಇದು ಸಾಧ್ಯವಾದರೆ 1 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಸಾಧ್ಯವಾಗಲಿದೆ. ಅಲ್ಲದೆ, ಎಚ್.ಪಿ ಕಂಪನಿಯು ರಾಜ್ಯದಲ್ಲಿ ತನ್ನ `ಗ್ಲೋಬಲ್ ಲೀಡರ್ ಶಿಪ್’ ಕಚೇರಿ ಹೊಂದಲು ಮನಸ್ಸು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪೆಟ್ರೋನಾಸ್ (ಗೆನಾತ್ರಿ) ಕಂಪನಿಯು ಶುದ್ಧ ಇಂಧನ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು, ರಾಜ್ಯದಲ್ಲಿ ಈ ವರ್ಷದ ಕೊನೆಯ ಹೊತ್ತಿಗೆ 30 ಗಿಗಾವ್ಯಾಟ್ ಮರುಬಳಕೆ ಮಾಡಹುದಾದ ಇಂಧನ ತಯಾರಿಸುವ ಗುರಿ ಹೊಂದಿದೆ. ಅಲ್ಲದೆ, ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ತ್ಯಾಜ್ಯ ನಿರ್ವಹಣೆಯನ್ನು ಅದು ವೈಜ್ಞಾನಿಕವಾಗಿ ಮಾಡಲು ಆಸಕ್ತಿ ಹೊಂದಿದೆ. ಈ ನಿಟ್ಟಿನಲ್ಲಿ ಅದು ರಾಜ್ಯ ಸರಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದು ಹೇಳಿದ್ದಾರೆ.

ಇದೇ ರೀತಿಯಲ್ಲಿ ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಸಿಸ್ಕೋ, ನಗರ ಸಂಚಾರ ವ್ಯವಸ್ಥೆಯೊಂದಿಗೆ ಸ್ವಿಗ್ಗಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ವೋಲ್ವೋ ಕಂಪನಿಗಳು ಹೆಚ್ಚಿನ ಬಂಡವಾಳ ಹೂಡಲು ಮುಂದೆ ಬಂದಿವೆ. ಇವುಗಳ ಹೂಡಿಕೆ ಪ್ರಸ್ತಾವನೆಗೆ ರಾಜ್ಯ ಸರಕಾರವು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲ ಬಗೆಹ ಸಹಕಾರ ಕೊಡುವ ಭರವಸೆ ನೀಡಲಾಗಿದೆ ಎಂದು ಎಂ.ಬಿ. ಪಾಟೀಲ ವಿವರಿಸಿದ್ದಾರೆ.

ಈ ಹೂಡಿಕೆಗಳ ಸಂಬಂಧವಾಗಿ ಎಚ್.ಸಿಎಲ್ ಕಂಪನಿಯ ಮುಖ್ಯಸ್ಥ ಬಾಲಸುಬ್ರಮಣಿಯನ್, ಪೆಟ್ರೋನಾಸ್ ಕಂಪನಿಯ ಸಿಇಒ ಸುಶೀಲ್ ಪುರೋಹಿತ್, ಸಿಸ್ಕೋದ ಪ್ರಧಾನ ವ್ಯವಸ್ಥಾಕಪ ಜೀತು ಪಟೇಲ್ ಮುಂತಾದವರೊಂದಿಗೆ ವಿಸ್ತೃತ ಮಾತುಕತೆ ನಡೆಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ದಾವೋಸ್ ಶೃಂಗಸಭೆಗೆ ರಾಜ್ಯದಿಂದ ತೆರಳಿರುವ ನಿಯೋಗದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ್ ಇದ್ದಾರೆ.

Previous Post
ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದ ನಿಯೋಗವು ದಾವೋಸ್ ನಲ್ಲಿ ಪೆಟ್ರೋನಾಸ್ ಕಂಪನಿ ಮತ್ತು ಹ್ಯೂಲೆಟ್ ಪೆಕಾರ್ಡ್ ಕಂಪನಿ ಪ್ರಮುಖರೊಂದಿಗೆ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದರು.
Next Post
ಅಮಿತ್ ಶಾ ಅವರೊಂದಿಗೆ 45 ನಿಮಿಷಗಳ ಕಾಲ ಚರ್ಚೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

Recent News